ಮಾತೃಪಕ್ಷ ಬಿಜೆಪಿಗೆ ಮರಳಿದ ಗಣಿಧಣಿ ಜನಾರ್ಧನ್ ರೆಡ್ಡಿ – ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ
- ರಾಜಕೀಯ
- March 25, 2024
- No Comment
- 610
ನ್ಯೂಸ್ ಆ್ಯರೋ : ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಜನಾರ್ದನ ರೆಡ್ಡಿಗೆ ಬಿಜೆಪಿ ಪಕ್ಷದ ಬಾವುಟ ನೀಡಿ ವಿಜಯೇಂದ್ರ ಸ್ವಾಗತ ಕೋರಿದರು.ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಬಿಜೆಪಿ ಸ್ವತಂತ್ರವಾಗಿ ಮೊದಲ ಬಾರಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ರೆಡ್ಡಿ ಅವರ ರಾಜಕಾರಣವು ಗಣಿ ಕೇಸ್ನ ನಂತರ ಮುಕ್ತಾಯವಾಯಿತು ಎಂದೇ ಹೇಳಲಾಗುತ್ತಿತ್ತು. ಆದರೆ, ಕಳೆದ ವಿಧಾನಸಭಾ ಚುನಾವಣೆಯ ವೇಳೆ ಫೀನಿಕ್ಸ್ ಹಕ್ಕಿಯಂತೆ ಪುನಃ ಪುಟಿದೆದ್ದ ಜನಾರ್ಧನ ರೆಡ್ಡಿ ಸ್ವಂತ ಪಕ್ಷ ಕಟ್ಟಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿಯೂ ಆಯ್ಕೆಯಾಗಿದ್ದರು.
ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ಜನಾರ್ಧನ ರೆಡ್ಡಿ ಅವರ ನಡೆಯಿಂದ ಎಲ್ಲರೂ ಶಾಕ್ ಆಗಿದ್ದರು. ಆದರೆ, ಈಗ ಲೋಕಸಭಾ ಚುನಾವಣೆ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಈಗ ಬಿಜೆಪಿಗೆ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಇದರೊಂದಿಗೆ ಪಕ್ಷ ಬಿಟ್ಟು ಹೋದವರನ್ನು ಮರಳಿ ಪಕ್ಷಕ್ಕೆ ಸೇರಿಸುವ ಮೂಲಕ ವಿಜಯೇಂದ್ರ ಯಶಸ್ವಿ ರಾಜ್ಯಾಧ್ಯಕ್ಷರಾಗಿ ಗುರುತಿಸಲ್ಪಟ್ಟಿದ್ದಾರೆ.