ಆರ್ಥಿಕ ಸಂಕಷ್ಟದಲ್ಲಿ ಸರ್ಕಾರ; ಜನರಿಗೆ ನೀಡಿದ್ದ ‘ಗ್ಯಾರಂಟಿ’ ವಾಪಸ್ ಅಭಿಯಾನ ಶುರು
ನ್ಯೂಸ್ ಆ್ಯರೋ: ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದ ಹಿಮಾಚಲ ಸರ್ಕಾರ ಇದೀಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ರಾಜ್ಯದಲ್ಲಿ ವಿದ್ಯುತ್ ಸಬ್ಸಿಡಿ ವಾಪಸ್ ಅಭಿಯಾನ ಶುರುವಾಗಿದೆ.
ಪ್ರತಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಮಾತನಾಡಿ, ಆರ್ಥಿಕ ಸಂಕಷ್ಟದಲ್ಲಿರುವುದರಿಂದ ರಾಜ್ಯದಲ್ಲಿ ಹಣ ಉಳಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದ್ದು, ವಿದ್ಯುತ್ ಸಬ್ಸಿಡಿಯನ್ನು ತ್ಯಜಿಸುವಂತೆ ಜನರಿಗೆ ಮನವಿ ಮಾಡಿಕೊಂಡಿದ್ದಾರೆ.
ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಅವರು ತಮ್ಮ ಹೆಸರಿನಲ್ಲಿ ನೋಂದಣಿಯಾಗಿದ್ದ ವಿದ್ಯುತ್ ಸಬ್ಸಿಡಿ ವಾಪಸ್ ನೀಡಿದ್ದಾರೆ. ಅಲ್ಲದೇ ಇತರೆ ಅರ್ಹರಿಗೂ ಸಬ್ಸಿಡಿ ಯೋಜನೆಯಿಂದ ಹಿಂದೆ ಸರಿಯುವಂತೆ ಕರೆ ನೀಡಿದ್ದಾರೆ. ಒಟ್ಟು ತಮ್ಮ ಹೆಸರಿನಲ್ಲಿ ನೋಂದಣಿಯಾಗಿದ್ದ 5 ವಿದ್ಯುತ್ ಸಂಪರ್ಕಗಳಿಗೆ ಸಿಗುತ್ತಿದ್ದ ಸಬ್ಸಿಡಿಯನ್ನು ಹಿಂದಿರುಗಿಸಿದ್ದು, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬಹುವಿದ್ಯುತ್ ಸಂಪರ್ಕವನ್ನು ಹೊಂದಿರುವ ಜನರು, ಸಬ್ಸಿಡಿಯನ್ನು ವಾಪಸ್ ನೀಡುವಂತೆ ಕೋರಿದ್ದಾರೆ.
ಸರ್ಕಾರ ವಿದ್ಯುತ್ ಸಬ್ಸಿಡಿಗಾಗಿ ವಾರ್ಷಿಕ 2,200 ಕೋಟಿ ರೂ. ಖರ್ಚು ಮಾಡುತ್ತದೆ. ವಿದ್ಯುತ್ ಇಲಾಖೆಯ ನೌಕರರ ಸಂಬಳ ಮತ್ತು ಪಿಂಚಣಿಗಾಗಿ ತಿಂಗಳಿಗೆ 200 ಕೋಟಿ ರೂ. ಖರ್ಚು ಮಾಡುತ್ತಿದೆ. ಸಬ್ಸಿಡಿ ಅಗತ್ಯ ಇರುವವರಿಗೆ ಮೀಸಲು, ಅನುಕೂಲಸ್ಥರು ರಾಜ್ಯದ ಅಭಿವೃದ್ಧಿ ಕಾರಣಕ್ಕೆ ವಾಪಸ್ ನೀಡಬೇಕು ಎಂದಿದ್ದಾರೆ.
ಇದಕ್ಕೂ ಮುನ್ನ ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯದಲ್ಲಿ ಹಲವು ವೆಚ್ಚಗಳಿಗೆ ಕಡಿವಾಣ ಹಾಕಿತ್ತು. ಸಿಎಂ, ಪಕ್ಷದ ಶಾಸಕರು, ಉನ್ನತ ಅಧಿಕಾರಿಗಳ ವೇತನ ಪಾವತಿಯಲ್ಲಿ ವಿಳಂಬವಾಗಿತ್ತು. ಅಲ್ಲದೇ ಕೆಲ ಸರ್ಕಾರಿ ಹೋಟೆಲ್ಗಳನ್ನು ಕೂಡ ಮಾರಾಟ ಮಾಡಲಾಗಿತ್ತು. ಅನರ್ಹ ಶಾಸಕರಿಗೆ ಪಿಂಚಣಿ ನಿಲ್ಲಿಸುವ ನಿರ್ಧಾರ ಪ್ರಕಟಿಸಿತ್ತು. ಉದ್ಯಮ, ಹೋಟೆಲ್ಗಳಿಗೆ ನೀಡುವ ವಿದ್ಯುತ್ ಸಬ್ಸಿಡಿ ಕಡಿತ ಮಾಡಲಾಗಿತ್ತು.
Leave a Comment