ಕಡಬದ ತಾಲೂಕಿನ ಕಾಡಿನ ಮನೆಯೊಂದಕ್ಕೆ ಶಸ್ತ್ರಸಜ್ಜಿತ ನಕ್ಸಲರ ಭೇಟಿ – ಮೊಬೈಲ್ ಚಾರ್ಜ್ ಮಾಡಿ ಕಾಲ್ಕಿತ್ತ ಆಗಂತುಕರು : ತೀವ್ರಗೊಂಡ ಎಎನ್ಎಫ್ ಕೂಂಬಿಂಗ್
- ಕರಾವಳಿ
- March 24, 2024
- No Comment
- 917
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.
ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭ ಮೂವರು ಶಂಕಿತರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ.
ಆಗಂತುಕರ ಬಳಿ ಶಸ್ತ್ರಾಸ್ತ್ರಗಳಿದ್ದ ಮಾಹಿತಿ ಸಿಕ್ಕಿದೆ. ಜೊತೆಗೆ ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ಬಂದಿದ್ದ ಶಂಕಿತ ನಕ್ಸಲರು, ಇಂದು ಐನೆಕಿದಿನಲ್ಲಿ ಕಾಣಿಸಿಕೊಂಡಿದ್ದಾರೆ. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದೆ. ಇದೇ ಭಾಗದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರೂ ಎಎನ್ಎಫ್ ತಂಡಕ್ಕೆ ಶಂಕಿತರು ಕಾಣಿಸಿರಲಿಲ್ಲ.
ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು. ಆ ಬಳಿಕ ಸಂಪಾಜೆ ಮೂಲಕ ಕೇರಳಕ್ಕೆ ಅರಣ್ಯದೊಳಗೆ ಸಂಪರ್ಕ ಸಾಧಿಸಲು ಸಾಧ್ಯವಿದೆ. ಸದ್ಯ ನಕ್ಸಲ್ ನಿಗ್ರಹ ದಳ ಶೋಧ ಚುರುಕುಗೊಳಿಸಿದೆ.
ಇನ್ನು ವಾರದ ಹಿಂದೆ ಶಂಕಿತ ನಕ್ಸಲರ ಚಲನವಲನದ ವರದಿಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ-ಕೊಡಗು ಗಡಿ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್ಎಫ್) ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು.
ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಹ್ಮಣ್ಯ ಸಮೀಪದ ಕೂಜಮಲೈ ರಬ್ಬರ್ ಎಸ್ಟೇಟ್ ಬಳಿಯ ಅಂಗಡಿಯೊಂದರಲ್ಲಿ ಶನಿವಾರ ಸಂಜೆ 8 ಮಂದಿ ಶಂಕಿತ ನಕ್ಸಲರ ತಂಡ, ಶಸ್ತ್ರಾಸ್ತ್ರಗಳೊಂದಿಗೆ ದಿನಸಿ ವಸ್ತುಗಳನ್ನು ಖರೀದಿಸಿದರು ಎಂಬ ಮಾಹಿತಿಯೂ ಸಿಕ್ಕಿದೆ.