ಕು. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ಮರುತನಿಖೆ ನಡೆಸುವಂತೆ ಸಿಎಂ ಗೆ ಶಾಸಕ ಹರೀಶ್ ಪೂಂಜಾ ಮನವಿ
- ಕರಾವಳಿ
- July 22, 2023
- No Comment
- 171
ನ್ಯೂಸ್ ಆ್ಯರೋ : ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಧರ್ಮಸ್ಥಳದ ಸೌಜನ್ಯಾ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲೇನಿದೆ?
ಈ ಕುರಿತು ಸಿದ್ದರಾಮಯ್ಯ ಅವರಿಗೆ ಲಿಖಿತ ದೂರು ನೀಡಿರುವ ಹರೀಶ್ ಪೂಂಜಾ ಸೌಜನ್ಯಾ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು, ಅದರ ವಿಚಾರವಾಗಿ ಹಲವು ತನಿಖೆ ನಡೆದು ತಮ್ಮ ನೇತೃತ್ವದ ಸರಕಾರ ಈ ಪ್ರಕರಣವನ್ನು ಸಿ.ಬಿ.ಐ.ಗೆ ಒಪ್ಪಿಸಿದೆ. 2023ರಲ್ಲಿ ಆರೋಪಿಯನ್ನು ನ್ಯಾಯಾಲಯ ಆರೋಪಮುಕ್ತಗೊಳಿಸಿದೆ.
ಅಪರಾಧಿಗಳನ್ನು ಕಾನೂನಿನ ಚೌಕಟ್ಟಿಗೆ ತರಲು ಸರಕಾರ ವಿಫಲವಾಗಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯ. ಆದ್ದರಿಂದ ಸಾರ್ವಜನಿಕರ ಭಾವನೆಯನ್ನು ಗಂಭೀರವಾಗಿ ಪರಿಗಣಿಸಿ ಸರಕಾರ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ಸೌಜನ್ಯಾ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕಾಗಿ ಶಾಸಕನ ನೆಲೆಯಲ್ಲಿ ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ. ಈ ಪತ್ರಕ್ಕೆ ವಿಧಾನ ಪರಿಷತ್ತು ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಕೂಡ ಸಹಿ ಹಾಕಿದ್ದಾರೆ.