Subramanya Shasti : ಅದ್ಧೂರಿಯಾಗಿ ನೆರವೇರಿದ ಬ್ರಹ್ಮರಥೋತ್ಸವ – ಲಕ್ಷಾಂತರ ಭಕ್ತರು ಭಾಗಿ
- ಕರಾವಳಿ
- December 18, 2023
- No Comment
- 426
ನ್ಯೂಸ್ ಆ್ಯರೋ : ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಸೋಮವಾರ ಧನುರ್ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾಗಿ, ಮಹಾರಥೋತ್ಸವ ಜರುಗಿತು. ಅಲ್ಲದೆ ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾಗಿ, ಚಿಕ್ಕ ರಥೋತ್ಸವ ಜರುಗಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೇರೆ ಬೇರೆ ಜಿಲ್ಲೆಯಿಂದ ಬೇರೆ ರಾಜ್ಯದಿಂದಲೂ ಭಕ್ತರು ಆಗಮಿಸಿದ್ದು ವಿಜೃಂಭಣೆಯಿಂದ ರಥೋತ್ಸವ ನೆರವೇರಿತು. ವಿಶೇಷ ಎಂಬಂತೆ ಚಂಪಾಷಷ್ಠಿಯ ಈ ಸಂದರ್ಭ ಸುಬ್ರಹ್ಮಣ್ಯ ದೇವರ ರಥೋತ್ಸವನ್ನು ಕಣ್ತುಂಬಿಕೊಳ್ಳಲು ಬೆಳ್ಳಂ ಬೆಳಗ್ಗೆ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸಿರುವುದು ವಿಶೇಷವಾಗಿತ್ತು.
ದ.ಕ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಸಂಭ್ರಮ ಇನ್ನು ಇಂದು ಬೆಳಗ್ಗೆ ಸುಬ್ರಹ್ಮಣ್ಯ ದೇವರ ಬ್ರಹ್ಮ ರಥೋತ್ಸವ ಆರಂಭಗೊಂಡಿದ್ದು 7.33ರ ಧನುಲಗ್ನ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವಕ್ಕೆ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.
ಈ ವೇಳೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಮಿತಿ ಸದಸ್ಯರು ಹಾಗೂ ಲಕ್ಷಾಂತರ ಭಕ್ತರು ಉಪಸ್ಥಿತರಿದ್ದರು.