ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಐವರು ಆರೋಪಿಗಳ ಸುಳಿವು ನೀಡುವಂತೆ NIA ಮನವಿ, ಬಹುಮಾನ ಘೋಷಣೆ
- ರಾಷ್ಟ್ರೀಯ ಸುದ್ದಿ
- December 16, 2023
- No Comment
- 1063
ನ್ಯೂಸ್ ಆ್ಯರೋ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಐವರು ಆರೋಪಿಗಳ ಕುರಿತಂತೆ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಎನ್ಐಎ, ಆರೋಪಿಗಳ ಬಂಧನಕ್ಕೆ ಅಗತ್ಯವಾದ ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಜೊತೆಗೆ, ಮಾಹಿತಿದಾರರ ವಿವರವನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಹಾಗೂ ಭಯ ಹುಟ್ಟಿಸುವ ಉದ್ದೇಶದಿಂದ ಕೃತ್ಯದಲ್ಲಿ ಭಾಗಿಯಾಗಿದ್ದ ಪ್ರಕರಣದ 15ನೇ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಮೊಹಮ್ಮದ್ ಮುಸ್ತಫಾ, 16ನೇ ಆರೋಪಿಯಾಗಿರುವ ನೆಕ್ಕಿಲಾಡಿ ಮೂಲದ ಮಸೂದ್ ಅಂಗಡಿ, 17ನೇ ಆರೋಪಿಯಾಗಿರುವ ಬಂಟ್ವಾಳ ಮೂಲದ ಮೊಹಮ್ಮದ್ ಶರೀಫ್, 18ನೇ ಆರೋಪಿ ಉಮರ್ ಆರ್., ಹಾಗೂ 19ನೇ ಆರೋಪಿಯಾಗಿರುವ ಬೆಳ್ಳಾರೆ ಮೂಲದ ಅಬೂಬಕ್ಕರ್ ಸಿದ್ದಿಕಿಯ ಕುರಿತು ಮಾಹಿತಿ ನೀಡಿದರೆ ಸೂಕ್ತ ಬಹುಮಾನ ನೀಡುವುದಾಗಿ ಘೋಷಿಸಿದೆ. ಮಾಹಿತಿ ಕಳುಹಿಸಲು +919497715294 ವಾಟ್ಸ್ ಆ್ಯಪ್ ಸಂಖ್ಯೆಯನ್ನು ಎನ್ಐಎ ನೀಡಿದೆ.
ಕಳೆದ ವರ್ಷ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಪ್ರವೀಣ್ ಬೈಕ್ನಲ್ಲಿ ಮನೆಗೆ ಹೊರಡಲು ಸಿದ್ಧರಾಗಿದ್ದಾಗ ಬೈಕ್ನಲ್ಲಿ ಆಗಮಿಸಿದ್ದ ಮುಸುಕುಧಾರಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಮಾರ್ಗಮಧ್ಯೆ ಮೃತಪಟ್ಟಿದ್ದರು.