ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಬಾಗಪ್ಪ ಹರಿಜನ ಬರ್ಬರ ಹತ್ಯೆ

bhagappa
Spread the love

ನ್ಯೂಸ್ ಆ್ಯರೋ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ.

ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ.

ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ 8-50 ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ SP ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಪತ್ತೆಗಾಗಿ ASP ರಾಮನಗೌಡ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.ಈ ಹಿಂದೆ 2023 ರಲ್ಲಿ ಕೋರ್ಟ್ ಆವರಣದಲ್ಲಿ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.

ಅಪಚಿತರ ವ್ಯಕ್ತಿಯೊಬ್ಬ ಏಕಾಏಕಿ ಐದು ಸುತ್ತು ಗುಂಡು ಹಾರಿಸಿದ್ದರಿಂದ ಬಾಗಪ್ಪ ಹರಿಜನನ ಎದೆ ಭಾಗಕ್ಕೆ ಹೊಕ್ಕಿತ್ತು. ಕೂಡಲೇ ಆತನನ್ನು ಬಿಎಲ್ ಡಿಇ ಆಸ್ಪತ್ರೆಗೆ ದಾಖಲು ಮಾಡುವ ಮೂಲಕ ಬದುಕುಳಿದಿದ್ದ. ಆದರೆ, ಈಗ ಸುಮಾರು 20 ಜನರಿಂದ ತಂಡ ಯೋಜಿತ ರೀತಿಯಲ್ಲಿ ದಾಳಿ ನಡೆಸಿದ್ದು, ಬಾಗಪ್ಪ ಹರಿಜನ್ ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ.

ಭೀಮಾ ತೀರದ ಹಂತಕದ ಕುಖ್ಯಾತಿಯಲ್ಲಿ ಬಾಗಪ್ಪ ಹರಿಜನ ಕೂಡ ಒಬ್ಬ. ಈ ಹಿಂದೆ ಇಡೀ ಭೀಮಾತೀರವನ್ನು ನಡುಗಿಸಿದ್ದ ಚಂದಪ್ಪ ಹರಿಜನನ ಸಹೋದರ ಸಂಬಂಧಿ ಕೂಡ ಆಗಿರುವ ಬಾಗಪ್ಪ ಹರಿಜನ ಚಂದಪ್ಪ ಹರಿಜನನ ಬಲಗೈ ಬಂಟನಾಗಿದ್ದ. ಚಂದಪ್ಪನ ಸಾವಿನ ಬಳಿಕ ಕುಟುಂಬದಲ್ಲಿ ಉಂಟಾಗಿದ್ದ ಆಸ್ತಿ ಗಲಾಟೆ ಪ್ರಕರಣದಲ್ಲಿ ಬಾಗಪ್ಪ ಚಂದಪ್ಪನ ಸಹೋದರ ಬಸಪ್ಪ ಹರಿಜನ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ. 2013ರಲ್ಲಿ ಬ್ಯಾಡಗಿಹಾಳ ಗ್ರಾಮದ ಬಸ್‌ ಕಂಡಕ್ಟರ್‌ ಲಾಳಸಂಗಿ ಎಂಬುವರ ಕೊಲೆ ಪ್ರಕರಣದಲ್ಲಿ ಬಾಗಪ್ಪ ಪ್ರಮುಖ ಪಾತ್ರಧಾರಿಯಾಗಿದ್ದು, ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

Leave a Comment

Leave a Reply

Your email address will not be published. Required fields are marked *