ಐದು ಗ್ಯಾರಂಟಿ ಯೋಜನೆಗಳು ಇಂದಿನಿಂದಲೇ ಜಾರಿ – ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
- ರಾಜಕೀಯ
- May 20, 2023
- No Comment
- 127
ನ್ಯೂಸ್ ಆ್ಯರೋ : ಚುನಾವಣಾ ಸಂದರ್ಭದಲ್ಲಿ ನಾವು ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದಿನಿಂದಲೇ ಜಾರಿ ಮಾಡುತ್ತೇವೆ ಎಂದು ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರಿನ ಕಂಠೀರವ ಮೈದಾನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲಾ ಐದು ಗ್ಯಾರಂಟಿಗಳಿಗೆ ಅನುಮತಿ ನೀಡಿ ಜಾರಿಗೆ ತರುತ್ತೇವೆ. ನುಡಿದಂತೆ ನಡೆಯುತ್ತೇವೆ. ಹೆಚ್ಚಿನ ವಿವರಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಲಾಗುವುದು. ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2,000 ರೂ. ನೀಡಲಾಗುವುದು. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3,000 ರೂ., ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1,500 ರೂ. ನೀಡಲಾಗುವುದು ಎಂದು ಘೋಷಿಸಿದರು.
ಕಳೆದ ಬಾರಿ ನಾವು 158 ಭರವಸೆಗಳನ್ನು ಈಡೇರಿಸಿದ್ದೆವು. ಹೆಚ್ಚುವರಿಯಾಗಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಕೊಟ್ಟ ಮಾತಿನಂತೆ ನಾವು ನಡೆಯುತ್ತೇವೆ ಎಂಬ ವಿಶ್ವಾಸ ಜನರಲ್ಲಿದೆ ಎಂದು ಅವರು ಹೇಳಿದರು. ನಾವು ಭರವಸೆಗಳನ್ನು ಈಡೇರಿಸುತ್ತೇವೆ. ಆದರೆ ನಾವು ಭರವಸೆ ಈಡೇರಿಸಲಾರೆವು ಎಂದು ಪ್ರಧಾನಿ ನರೇಂದ್ರ ಮೋದಿಯೇ ಅಪ ಪ್ರಚಾರ ಮಾಡಿದ್ದರು. ಮನ್ ಕೀ ಬಾತ್ನಲ್ಲೇ ಕಾಂಗ್ರೆಸ್ಸಿಗರಿಂದ ಸುಳ್ಳು ಭರವಸೆ ಎಂದಿದ್ದರು ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
5 ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ರೂ. ಆಗಬಹುದು. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರಬೇಕಿದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ನಮ್ಮ ರಾಜ್ಯದ ಬಜೆಟ್ ಗಾತ್ರ 3.10 ಲಕ್ಷ ಕೋಟಿ ರೂ. ಇದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಸಿದ್ದರಾಮಯ್ಯ ದೂರಿದರು.
5 ಗ್ಯಾರಂಟಿ ಯೋಜನೆಯಾದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಬಿಜೆಪಿಯವರು ಹೇಳುತ್ತಾರೆ. ದೇಶವನ್ನು ಸಾಲಗಾರ ಮಾಡಿದ್ದು ಯಾರು? ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕೇವಲ ಬರೀ 53 ಲಕ್ಷ ಕೋಟಿ ರೂ. ಸಾಲ ಇತ್ತು. ಈಗ 155 ಲಕ್ಷ ಕೋಟಿ ರೂ. ಸಾಲ ದೇಶದ ಮೇಲಿದೆ. ಈಗ ರಾಜ್ಯದ ಸಾಲ 3 ಲಕ್ಷದ 22 ಸಾವಿರ ಕೋಟಿ ರೂ. ಇದೆ ಎಂದು ಸಿದ್ದರಾಮಯ್ಯ ಹೇಳಿದರು.