‘ನಾನು ರಾಜ್ಯಾಧ್ಯಕ್ಷ.. ಪುತ್ತಿಲ ವಿಚಾರ ನಮ್ಮ ಮೇಲಿನವ್ರು ನೋಡ್ಕೊಳ್ತಾರೆ..!’ – ಪುತ್ತಿಲ ಸ್ಪರ್ಧೆ ಬಗ್ಗೆ ಕೊನೆಗೂ ಮೌನ ಮುರಿದ ಕಟೀಲ್
- ರಾಜಕೀಯ
- July 15, 2023
- No Comment
- 181
ನ್ಯೂಸ್ ಆ್ಯರೋ : ಬಿಜೆಪಿಯ ಭದ್ರಕೋಟೆ ಪುತ್ತೂರನ್ನು ಈ ಬಾರಿಯ ವಿಧಾನಸಭಾ ಚುನಾವಣೆ ವೇಳೆ ಅಲುಗಾಡಿಸಿದ್ದು ಹಿಂದು ಸಂಘಟನೆಯ ನಾಯಕ ಅರುಣ್ ಕುಮಾರ್ ಪುತ್ತಿಲ. ಬಿಜೆಪಿಯಿಂದ ಟಿಕೆಟ್ ದೊರೆಯದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಮಲ ಪಡೆ ಮೂರನೇ ಸ್ಥಾನಕ್ಕೆ ಕುಸಿಯಲು ಕಾರಣಕರ್ತರಾದರು. ಇವರ ಬೆಂಬಲಕ್ಕೆ ಜನ ಸಮೂಹವೇ ನಿಂತಿರುವುದು ಸದ್ಯ ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಸದ್ಯ ಈ ವಿಚಾರದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿದ್ದಾರೆ.
ಕಟೀಲು ಹೇಳಿದ್ದೇನು?
ಅರುಣ್ ಕುಮಾರ್ ಪುತ್ತಿಲ ಅವರ ವಿಚಾರ ರಾಷ್ಟ್ರೀಯ ನಾಯಕರ ಮಟ್ಟದಲ್ಲಿ ಚರ್ಚೆ ನಡೆದಿದೆ. ಅಂತಿಮ ತೀರ್ಮಾನವನ್ನು ರಾಷ್ಟ್ರೀಯ ನಾಯಕರೇ ಪ್ರಕಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ಚುನಾವಣೆಯ ವೇಳೆ ಬಿಜೆಪಿಯಲ್ಲಿ ಯಾವುದೇ ಗೊಂದಲ ಎದುರಾಗಿರಲಿಲ್ಲ. ನಾಯಕರೆಲ್ಲ ಒಟ್ಟಾಗಿಯೇ ಕೆಲಸ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿಯ ಸ್ಪರ್ಧೆಯಿಂದಾಗಿ ಫಲಿತಾಂಶ ಏರುಪೇರಾಗಿದೆ. ಪಕ್ಷದಲ್ಲಿ ಯಾರು ಇರಬೇಕು, ಯಾರು ಬರಬೇಕು ಎನ್ನುವುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ ಎಂದಿದ್ದಾರೆ.
ಗ್ರಾ.ಪಂ. ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಿರುವ ಕುರಿತು ಪ್ರತಿಕ್ರಿಯಿಸಿದ ಕಟೀಲು, ನಮ್ಮದು ಪ್ರಜಾಪ್ರಭುತ್ವ ದೇಶ. ಇಲ್ಲಿ ಯಾರೂ ಬೇಕಾದರೂ ಸ್ಪರ್ಧಿಸಬಹುದು. ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಮಗೆ ಇದಷ್ಟೆ ಮುಖ್ಯ ಎಂದು ಹೇಳಿದ್ದಾರೆ.
ಜೆಡಿಎಸ್ ಜೊತೆ ಹೊಂದಾಣಿಕೆ ಏನಾಯ್ತು?
ಲೋಕಸಭೆ ಚುನಾವಣೆ ವೇಳೆ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲಿದೆ ಎನ್ನುವ ಸುದ್ದಿ ಹಬ್ಬಿರುವ ಬಗ್ಗೆ ಮಾತನಾಡಿದ ಕಟೀಲು, ಅಂತಹ ಯಾವುದೇ ಪ್ರಸ್ತಾವ ನಮ್ಮ ಮುಂದಿಲ್ಲ. ಲೋಕಸಭೆ ಚುನಾವಣೆಗೆ ತಯಾರಿ ನಡೆಸಿದ್ದು ಬಿಟ್ಟರೆ ಬೇರೇನು ಇಲ್ಲ ಎಂದಿದ್ದಾರೆ. ಜೈನ ಮುನಿ, ಉದ್ಯಮಿ, ಸಂಘಟನೆಯ ಕಾರ್ಯಕರ್ತ, ಕಾರ್ಮಿಕ ಹೀಗೆ ಸಾಲು ಸಾಲು ಹತ್ಯೆ ನಡೆಯುತ್ತಿದ್ದರೂ ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈ ಎಲ್ಲಾ ಹತ್ಯೆಗಳ ಪಾರದರ್ಶಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.