
ರೈತರ ವಿರೋಧದ ನಡುವೆಯೂ ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಹರಿಸಲು ಸೂಚನೆ – ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ
- ಕರ್ನಾಟಕ
- September 13, 2023
- No Comment
- 29
ನ್ಯೂಸ್ ಆ್ಯರೋ : ಕರ್ನಾಟಕ ರೈತರ ವಿರೋಧದ ನಡುವೆಯೂ ತಮಿಳುನಾಡಿಗೆ ಮತ್ತೆ 15 ದಿನ 5000 ಕ್ಯೂಸೆಕ್ಸ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ.
ಮಂಗಳವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಮಿತಿ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿರುವುದಕ್ಕೆ ಮಂಡ್ಯದ ರೈತರ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ಆದೇಶ ಹೊರಡಿಸುತ್ತಿದ್ದಂತೆ ಮಂಡ್ಯದಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಹೆಚ್ಚಾಗತೊಡಗಿದೆ. ಶ್ರೀರಂಗಪಟ್ಟಣದಲ್ಲಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ಮುಂದುವರಿದಿದ್ದು, ಬೆಂಗಳೂರು, ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕುತ್ತಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
ಈ ಬಗ್ಗೆ ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಮಾತನಾಡಿ, ರಾಜ್ಯದ ರೈತರ ಬೆಳೆಗೆ, ಬೆಂಗಳೂರಿನ ಜನರಿಗೆ ಕುಡಿಯಲು ನೀರಿಲ್ಲ. ಇಂತಹ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ನೀರು ಬಿಡಬಾರದು. ಸುಪ್ರೀಂಕೋರ್ಟ್ನಲ್ಲಿ ಸರ್ಕಾರ ಸಮರ್ಥವಾಗಿ ವಾದ ಮುಂದುವರಿಸಲಿ.
ಕಾವೇರಿ ನೀರಿನ ವಿಚಾರದಲ್ಲಿ ನಾವು ರಾಜ್ಯ ಸರ್ಕಾರದೊಂದಿಗೆ ಇದ್ದೇವೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಸರ್ಕಾರ, ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸುತ್ತೇವೆ ಎಂದು ಹೇಳಿದರು.