ದಕ್ಷಿಣ ಕನ್ನಡದ ಹಲವೆಡೆ ಮೊದಲ ಮಳೆಯ ಸಿಂಚನ – ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆ ನಿರೀಕ್ಷೆ : ಹವಾಮಾನ ಇಲಾಖೆ
- ಕರ್ನಾಟಕ
- March 22, 2024
- No Comment
- 1227
ನ್ಯೂಸ್ ಆ್ಯರೋ : ಬಿಸಿಲ ಬೇಗೆಯಿಂದ ಬಳಲುತ್ತಿರುವ ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 22 ರಿಂದ 24ರ ವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊದಲ ಮಳೆಯಾಗಿದ್ದು, ಬೆಳ್ಳಂಬೆಳಿಗ್ಗೆ ಮಳೆಯ ಸಿಂಚನವಾಗಿದೆ. ಜಿಲ್ಲೆಯ ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿ ಹಲವೆಡೆ ಮಳೆಯಾಗಿದ್ದು, ಜನರು ಫುಲ್ ಖುಷಿಯಾಗಿದ್ದಾರೆ. ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸದ್ಯ ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಈಗಾಗಲೇ ವರ್ಷದ ಮೊದಲ ಮಳೆಯಾಗಿದ್ದು, ಕೆಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ. ಈ ಬಾರಿ ರಾಜ್ಯದಲ್ಲಿ ಅವಧಿಗೂ ಮುನ್ನವೇ ಮಳೆ ಆರಂಭವಾಗುವ ಲಕ್ಷಣವಿದ್ದು, ಕಳೆದ ಬಾರಿಯಂತಾಗದೇ ಈ ಬಾರಿ ಉತ್ತಮ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಲಿದ್ದು, ಏಪ್ರಿಲ್ ಎರಡನೇ ವಾರ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.